ಕನ್ನಡ ರಾಜ್ಯೋತ್ಸವದ ಉತ್ಸವಮಯ ವಾತಾವರಣದ ನಡುವೆಯೇ ಬೆಳಗಾವಿಯಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ ಸದಾಶಿವನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ನಡೆದ ರೂಪಕ ಮೆರವಣಿಗೆಯ ವೇಳೆ ಜನರ ಮಧ್ಯೆ ನುಗ್ಗಿದ ದುಷ್ಕರ್ಮಿಗಳು ಐವರಿಗೆ ಮನಬಂದಂತೆ ಚಾಕು ಇರಿದು ಪರಾರಿಯಾಗಿದ್ದಾರೆ.
ಈ ಘಟನೆ ವೇಳೆ ಗುರುನಾಥ ವಕ್ಕುಂದ, ಸಚಿನ್ ಕಾಂಬಳೆ, ಲೋಕೇಶ್ ಬೆಟಗೇರಿ, ಮಹೇಶ್ ವಿನಾಯಕ ಹಾಗೂ ನಜೀರ್ ಪಠಾಣ್ ಎಂಬ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಮೂವರನ್ನು ಬಿಮ್ಸ್ ಆಸ್ಪತ್ರೆಗೆ ಹಾಗೂ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಲೆ, ಹೊಟ್ಟೆ ಮತ್ತು ಬೆನ್ನಿನ ಭಾಗಗಳಲ್ಲಿ ಇರಿತದಿಂದ ಗಂಭೀರ ಗಾಯಗಳಾಗಿವೆ.
ಘಟನೆಯ ಬಗ್ಗೆ ತಿಳಿದು ನಗರ ಪೊಲೀಸ್ ಆಯುಕ್ತ ಭೂಷಣ ಭೊರಸೆ ತುರ್ತುವಾಗಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಈ ಘಟನೆ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸರಿಂದ ಭದ್ರತೆ ಹೆಚ್ಚಿಸಲಾಗಿದೆ.
ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ತೀವ್ರ ತನಿಖೆ ಕೈಗೊಂಡಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಲಾಗಿದೆ.